ಜನನ-ಮರಣ ನೋಂದಣಿ ವಿವಾದ ತೀರ್ಮಾನ
ಸರಕಾರದ ತಿದ್ದುಪಡಿಗೆ ಹೈಕೋರ್ಟ್ ಮಧ್ಯಂತರ ತಡೆ

0

ಬೆಂಗಳೂರು:ಜನನ-ಮರಣ ನೋಂದಣಿ ವಿವಾದಗಳ ತೀರ್ಮಾನದಲ್ಲಿ ನ್ಯಾಯಾಂಗದ ಅಧಿಕಾರ ಮೊಟಕುಗೊಳಿಸಿ, ಅದನ್ನು ಉಪವಿಭಾಗಾಧಿಕಾರಿಗೆ ನೀಡಲು ಸರಕಾರ ಮಾಡಿದ್ದ ತಿದ್ದುಪಡಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ವಕೀಲರ ಸಂಘದ ಸದಸ್ಯ ಹಾಗೂ ಬೀದರ್ ವಕೀಲರ ಸಂಘದ ಅಧ್ಯಕ್ಷ ಸುದರ್ಶನ ವಿ.ಬಿರಾದಾರ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ|ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ಮಾಡಿತು.ಅಲ್ಲದೆ, ಪ್ರತಿವಾದಿಗಳಾದ ಸರಕಾರದ ಮುಖ್ಯ ಕಾರ್ಯದರ್ಶಿ, ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಜಾರಿಗೊಳಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಪರ ವಾದ ಮಂಡಿಸಿದ ಹೈಕೋರ್ಟ್‌ನ ಹಿರಿಯ ವಕೀಲ ಪಿ.ಪಿ.ಹೆಗ್ಡೆ, ಕೇಂದ್ರದ ಕಾಯಿದೆಗೆ ವಿರುದ್ಧವಾಗಿ ನಿಯಮಕ್ಕೆ ತಿದ್ದುಪಡಿ ಮಾಡುವ ಮೂಲಕ ಕೋರ್ಟ್‌ಗಳ ಅಧಿಕಾರ ಮೊಟಕುಗೊಳಿಸಿ ಉಪವಿಭಾಗಾಧಿಕಾರಿಗೆ ನೀಡಲಾಗಿದೆ.ಇದು ಕಾನೂನು ಬಾಹಿರ ಹಾಗೂ ಸಂವಿಧಾನದ ಮೂಲಭೂತ ತತ್ವಗಳಿಗೆ ವಿರುದ್ಧವಾದುದು.ಸಂವಿಧಾನದ ಪ್ರಕಾರ, ಜನನ ಮತ್ತು ಮರಣ ವ್ಯಾಜ್ಯ ಇತ್ಯರ್ಥಪಡಿಸುವ ಅಧಿಕಾರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಾತ್ರವಿದೆ.ರಾಜ್ಯ ಸರಕಾರಕ್ಕೆ ಅದಕ್ಕೆ ತಿದ್ದುಪಡಿ ಮಾಡುವ ಅಧಿಕಾರವೇ ಇಲ್ಲ' ಎಂದರು. ಉಪ ವಿಭಾಗಾಧಿಕಾರಿಗೆ ನ್ಯಾಯಾಂಗದ ಅಧಿಕಾರ ನೀಡಿರುವುದು ಕಾನೂನುಬಾಹಿರ.ಇದರಿಂದ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡುವುದಲ್ಲದೆ, ಜನರಿಗೆ ಇನ್ನಷ್ಟು ಸಮಸ್ಯೆಯಾಗಲಿದೆ. ಹಾಗಾಗಿ, ಸಂವಿಧಾನ ಬಾಹಿರವಾದ ಕ್ರಮಕ್ಕೆ ತಡೆ ನೀಡಬೇಕು’ ಎಂದು ಪಿ.ಪಿ.ಹೆಗ್ಡೆ ಕೋರಿದರು.


`ತಿದ್ದುಪಡಿಯಿಂದ ವೃತ್ತಿಪರ ವಕೀಲರಿಗೆ ತೊಂದರೆಯಾಗಲಿದ್ದು, ಅವರ ಜೀವನೋಪಾಯದ ಮೇಲೆ ಪರಿಣಾಮ ಬೀರಲಿದೆ.ಜನನ, ಮರಣ ನೋಂದಣಿ ಕಾಯಿದೆ ಸೆಕ್ಷನ್ 13(3)ರಡಿ ಪ್ರಥಮ ದರ್ಜೆ ಮ್ಯಾಜಿಸ್ಪ್ರೇಟ್ ಅಥವಾ ಪ್ರೆಸಿಡೆನ್ಸ್ ಮ್ಯಾಜಿಸ್ಪ್ರೇಟ್ ಮಾತ್ರ ಆದೇಶ ಹೊರಡಿಸಬಹುದಾಗಿದ್ದು, ಬೇರೆ ಯಾರಿಗೂ ಅಧಿಕಾರವಿಲ್ಲ.ಕಾಯಿದೆ ಸೆಕ್ಷನ್ 13(3)ರ ಅನ್ವಯ ಪ್ರೆಸಿಡೆನ್ಸ್ ಮ್ಯಾಜಿಸ್ಪ್ರೇಟ್ ಅಥವಾ ಪ್ರಥಮ ದರ್ಜೆ ಮ್ಯಾಜಿಸ್ಪ್ರೇಟ್‌ಗೆ ಮಾತ್ರ ಅಧಿಕಾರವಿತ್ತು.ಮೂಲ ಕಾಯಿದೆಗೆ ವಿರುದ್ಧವಾಗಿ ತಿದ್ದುಪಡಿ ಮಾಡಿ ಈಗ ಆ ಅಧಿಕಾರವನ್ನು ಉಪವಿಭಾಗಾಧಿಕಾರಿ ಅಥವಾ ಉಪ ಪ್ರಾದೇಶಿಕ ಮ್ಯಾಜಿಸ್ಪ್ರೇಟ್‌ಗೆ ನೀಡಲಾಗಿದೆ.ಈ ತಿದ್ದುಪಡಿ ಕಾಯಿದೆಯು ಕಾನೂನು ಬಾಹಿರ ಆಗಿರುವುದರಿಂದ ಕೂಡಲೇ ಅದನ್ನು ವಾಪಸ್ ಪಡೆಯಬೇಕು’ಎಂದು ವಕೀಲರ ಸಂಘ ಕಾನೂನು ಕಾರ್ಯದರ್ಶಿಗೆ ಪತ್ರ ಬರೆದಿತ್ತು.


ಬೆಂಗಳೂರು ವಕೀಲರ ಸಂಘ ಸೇರಿ ರಾಜ್ಯದ ಎಲ್ಲ ವಕೀಲರ ಸಂಘಟನೆಗಳು ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. ಅಲ್ಲದೆ, ಜನನ ಮತ್ತು ಮರಣ ನೋಂದಣಿ ಪ್ರಕರಣಗಳನ್ನು ನ್ಯಾಯಾಲಯಗಳಿಂದ ಉಪವಿಭಾಗಾಧಿಕಾರಿಗೆ ವರ್ಗಾಯಿಸುವ ಸರಕಾರದ ಕ್ರಮ ಕಾನೂನಬಾಹಿರವಾಗಿದೆ. ಜತೆಗೆ, ಕರ್ನಾಟಕ ಜನನ ಮತ್ತು ಮರಣ (ತಿದ್ದುಪಡಿ) ನಿಯಮ-2022ರ ತಿದ್ದುಪಡಿ ಮೂಲ ಕಾಯಿದೆಗೆ ವಿರುದ್ಧವಾಗಿದೆ.ಈ ಕುರಿತು ಜು.18ರಂದು ಹೊರಡಿಸಿರುವ ತಿದ್ದುಪಡಿ ಅಧಿಸೂಚನೆ ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.

`ಸಂವಿಧಾನದ ಪ್ರಕಾರ, ಜನನ ಮತ್ತು ಮರಣ ವ್ಯಾಜ್ಯ ಇತ್ಯರ್ಥಪಡಿಸುವ ಅಧಿಕಾರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಾತ್ರವಿದೆ.ರಾಜ್ಯ ಸರಕಾರಕ್ಕೆ ಅದಕ್ಕೆ ತಿದ್ದುಪಡಿ ಮಾಡುವ ಅಧಿಕಾರವೇ ಇಲ್ಲ’ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ಅವರು ನ್ಯಾಯಪೀಠದ ಗಮನ ಸೆಳೆದರು.

LEAVE A REPLY

Please enter your comment!
Please enter your name here